ಮೇಕೆದಾಟು ಯೋಜನೆಗೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಕರ್ನಾಟಕದ ಬಹುನಿರೀಕ್ಷಿತ ‘ಮೇಕೆದಾಟು ಯೋಜನೆ’ಗೆ ನೆರೆರಾಜ್ಯ ತಮಿಳುನಾಡಿನ ಅನುಮತಿ ಅಥವಾ ಸಮ್ಮತಿ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ.
ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಅನ್ಬುಮಣಿ ರಾಮದಾಸ್ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಅವರು ಲಿಖಿತ ಉತ್ತರ ನೀಡಿದ್ದಾರೆ. 2018ರ ಸುಪ್ರೀಂ ಕೋರ್ಟ್ ಅಂತಿಮ ತೀರ್ಪಿನಲ್ಲಿ ಮೇಲ್ಭಾಗದ ರಾಜ್ಯವಾದ ಕರ್ನಾಟಕವು ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೆಳಭಾಗದ ರಾಜ್ಯಗಳಾದ ತಮಿಳುನಾಡು, ಕೇರಳ ಅಥವಾ ಪುದುಚೇರಿಯಿಂದ ಒಪ್ಪಿಗೆ ಪಡೆಯಬೇಕೆಂದು ಎಲ್ಲಿಯೂ ಹೇಳಿಲ್ಲ ಎಂದು ಸಚಿವಾಲಯ ತಿಳಿಸಿದೆ.
ಕಾವೇರಿ ನೀರು ವಿವಾದ ನ್ಯಾಯಾಧಿಕರಣದ (CWDT) 2007ರ ತೀರ್ಪಿನ 18ನೇ ವಿಧಿಯನ್ನು ಉಲ್ಲೇಖಿಸಿದ ಕೇಂದ್ರ ಸರ್ಕಾರ, ನಿಗದಿತ ನೀರು ಹಂಚಿಕೆಯ ಆದೇಶಕ್ಕೆ ಧಕ್ಕೆಯಾಗದಂತೆ ತಮ್ಮ ಗಡಿ ವ್ಯಾಪ್ತಿಯಲ್ಲಿ ನೀರಿನ ಬಳಕೆ ಹಾಗೂ ನಿರ್ವಹಣೆ ಮಾಡುವ ಹಕ್ಕು ಆಯಾ ರಾಜ್ಯಗಳಿಗಿರುತ್ತದೆ ಎಂದು ವಿವರಿಸಿದೆ.
ಇದೇ ವೇಳೆ ಯೋಜನೆಯ ಸ್ಥಿತಿಗತಿಯ ಕುರಿತು ಮಾಹಿತಿ ನೀಡಿದ ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ 2019ರಲ್ಲಿ ಸಲ್ಲಿಸಿದ್ದ ಸಮಗ್ರ ಯೋಜನಾ ವರದಿಯನ್ನು (DPR) ಹಿಂತಿರುಗಿಸಲಾಗಿದ್ದು, ಸಿಡಬ್ಲ್ಯೂಸಿ (CWC) ಮಾರ್ಗದರ್ಶಿ ಸೂತ್ರಗಳಿಗೆ ಬದ್ಧವಾಗಿ ಪರಿಷ್ಕೃತ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.



