ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಅಡ್ಡೆ ಮೇಲೆ ತಹಶೀಲ್ದಾರ್ ದಿಢೀರ್ ದಾಳಿ – ಲಾರಿ ಜಪ್ತಿ, ಎಫ್ಐಆರ್ ದಾಖಲು!

ಸಾಗರ (ಶಿವಮೊಗ್ಗ): ಸಾಗರ ತಾಲೂಕಿನ ಬೊಮ್ಮತ್ತಿ ಬಳಿಯ ಬ್ರಾಹ್ಮಣ ಮಂಚಾಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ ಗಣಿಗಾರಿಕೆ ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲುಗಳನ್ನು ಸಾಗಾಟ ಮಾಡಲು ಸಿದ್ಧವಾಗಿದ್ದ ಲಾರಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅಕ್ರಮವಾಗಿ ಗಣಿಗಾರಿಕೆ ನಡೆಸಿ ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಿಸಲಾಗಿದೆ. ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರ ನೇತೃತ್ವದಲ್ಲಿ ನಡೆದ ಈ ಮಿಂಚಿನ ದಾಳಿಯಲ್ಲಿ ಕಂದಾಯ ನಿರೀಕ್ಷಕ (RI) ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿಕಾರಿ (VA) ನಂದೀಶ್ ಅವರು ಭಾಗವಹಿಸಿದ್ದರು.
ದಾಳಿ ಬಳಿಕ ಅಕ್ರಮಕೋರರಿಗೆ ಕಠಿಣ ಎಚ್ಚರಿಕೆ ನೀಡಿರುವ ತಹಶೀಲ್ದಾರ್ ಡಾ. ಪ್ರತಿಭಾ ಆರ್., “ಸಾಗರ ತಾಲೂಕಿನ ನೆಲ-ಜಲ ಹಾಗೂ ಪರಿಸರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆ ಹಾಗೂ ಸರ್ಕಾರಿ ಜಮೀನು ಒತ್ತುವರಿಯನ್ನು ಸಹಿಸುವುದಿಲ್ಲ. ಯಾರೇ ಪ್ರಭಾವ ಬೀರಿದರೂ ಬಗ್ಗದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ನಿಯಮ ಮೀರಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದರೆ ಜೈಲು ಶಿಕ್ಷೆ ಅನುಭವಿಸುವುದು ಖಚಿತ,” ಎಂದು ಖಡಕ್ ಸಂದೇಶ ನೀಡಿದ್ದಾರೆ.
ತಾಲ್ಲೂಕಿನಲ್ಲಿ ಅಕ್ರಮ ಒತ್ತುವರಿ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ತಹಶೀಲ್ದಾರ್ ಸಮರ ಸಾರಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರ್ಯಾಚರಣೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.



