ದೇವಾಲಯದ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ: 8 ಮಂದಿ ಬಂಧನ, ಮುಂಜಾಗ್ರತಾ ಕ್ರಮವಾಗಿ ಸಿ.ಸಿ. ಕ್ಯಾಮರಾ, ಗಸ್ತು ವ್ಯವಸ್ಥೆ!

ಸಿದ್ದಾಪುರ (ಕೊಡಗು): ಮಾಲ್ದಾರೆ ಸಮೀಪದ ಮೀಸಲು ಅರಣ್ಯ ಪ್ರದೇಶದೊಳಗೆ ಇರುವ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅನ್ಯಕೋಮಿನವರು ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಜುಲೈ 26 ರಂದು ಗೋರಿ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದವು.
ದೂರಿನ ಅನ್ವಯ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಹಾಗೂ ಮಡಿಕೇರಿ ಡಿ.ವೈ.ಎಸ್ಪಿ ಸೂರಜ್ ಮಾರ್ಗದರ್ಶನದಲ್ಲಿ, ಸಿ.ಐ. ಚಂದ್ರಶೇಖರ್ ಮತ್ತು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸಿ ಪಿರಿಯಾಪಟ್ಟಣ ತಾಲೂಕಿನ ಆಯಾರಬೀಡು ಗ್ರಾಮದ ನಿವಾಸಿಗಳನ್ನು ಬಂಧಿಸಿದೆ.
ಬಂಧಿತ ಆರೋಪಿಗಳು: ಮುಜಾಮಿಲ್ (32), ಅಶ್ವಿಕ್ ಪಾಷ (28), ರಶೀದ್ ಖಾನ್ (30), ಸೈಯದ್ ಸಾಧಿಕ್ (34), ಆಲಂ ಶರೀಫ್ (19), ತಂಜೀವ್ ಪಾಷ (30), ಮನ್ಸೂರ್ ಪಾಷ (33) ಹಾಗೂ ನಿಸಾರ್ ಅಹ್ಮದ್ (33).
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಪ್ರದೇಶಕ್ಕೆ ಆಗಮಿಸಲು ಬಳಸಿದ್ದ ಎರಡು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಘಟನೆ ಬೆನ್ನಲ್ಲೇ ದೇವಾಲಯದ ರಸ್ತೆಯಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಲು ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ದೇವಾಲಯಕ್ಕೆ ತೆರಳುವ ರಸ್ತೆ ಬದಿಯಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಮೀಸಲು ಅರಣ್ಯ ಪ್ರದೇಶಕ್ಕೆ ಅನಧಿಕೃತ ಪ್ರವೇಶ ತಡೆಯಲು ಹಗಲಿನ ವೇಳೆ ಕಾವಲು ಕಾಯಲು 2 ಸಿಬ್ಬಂದಿ ಹಾಗೂ ರಾತ್ರಿ ವೇಳೆ ಗಸ್ತು ತಿರುಗಲು ಅರಣ್ಯ ಇಲಾಖೆ ವಾಹನದೊಂದಿಗೆ 2 ಸಿಬ್ಬಂದಿಯನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ.
ಅಲ್ಲದೆ, ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮ ಪ್ರವೇಶ ಮಾಡಿದ ಹಿನ್ನೆಲೆಯಲ್ಲಿ ಕೆಲವರ ವಿರುದ್ಧ ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳು (RFO) ಕೂಡ ಪ್ರತ್ಯೇಕ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



