ಶಿರಸಿ ಸೆಂಟ್ರಲ್ ಬಸ್ ಸ್ಟ್ಯಾಂಡ್ನಲ್ಲಿ ಕೈಚಳಕ: ₹5 ಲಕ್ಷ ಮೌಲ್ಯದ ಚಿನ್ನದೊಂದಿಗೆ ಇಬ್ಬರು ಮಹಿಳೆಯರ ಬಂಧನ!

ಶಿರಸಿ ನಗರದ ಸೆಂಟ್ರಲ್ ಬಸ್ ಸ್ಟ್ಯಾಂಡ್ನಲ್ಲಿ ಪ್ರಯಾಣಿಕರ ಬ್ಯಾಗ್ನಿಂದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಶಿರಸಿ ನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೃತ್ಯ ಎಸಗಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಹಿನ್ನೆಲೆ:
ಕೆಲ ದಿನಗಳ ಹಿಂದೆ ಸೆಂಟ್ರಲ್ ಬಸ್ ಸ್ಟ್ಯಾಂಡ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ಜಿಪ್ ತೆರೆದು, ಅದರಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಶಾರ್ಟ್ ನೆಕ್ಲೆಸ್, 30 ಗ್ರಾಂ ತೂಕದ ಉದ್ದನೆಯ ಹಾರ, 2 ಗ್ರಾಂ ತೂಕದ ಉಂಗುರ ಹಾಗೂ 10 ಗ್ರಾಂ ತೂಕದ ಬೆಳ್ಳಿ ನಾಣ್ಯ ಸೇರಿದಂತೆ ಒಟ್ಟು ₹3.52 ಲಕ್ಷ ಮೌಲ್ಯದ ಆಭರಣಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಶೇಷ ಪಡೆ ಕಾರ್ಯಾಚರಣೆ ಹಾಗೂ ಬಂಧನ:
ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಿದ್ದ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳ ಸುಳಿವು ಪತ್ತೆಹಚ್ಚಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮಲ್ಲಿಗೇನಹಳ್ಳಿಯ ಸುಶೀಲಾ (39) ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಸಾಯಿಲಕ್ಷ್ಮಿ (36) ಬಂಧಿತ ಆರೋಪಿಗಳು. ಬಂಧಿತರಿಂದ ಒಟ್ಟು 50 ಗ್ರಾಂ ತೂಕದ, ₹5 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.
ಪೊಲೀಸ್ ತಂಡಕ್ಕೆ ಶ್ಲಾಘನೆ:
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐಪಿಎಸ್, ಹೆಚ್ಚುವರಿ ಎಎಸ್ಪಿ ಕೃಷ್ಣಮೂರ್ತಿ ಜಿ., ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಸಿಪಿಐ ಸಂಪತ್ ಇ.ಸಿ. ಅವರ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ನರಸಿಂಹಲು ಟಿ. ಮತ್ತು ನಾರಾಯಣ ರಾಠೋಡ್ ನೇತೃತ್ವದ ಸಿಬ್ಬಂದಿ ಪಡೆ ಹಾಗೂ ಕಾರವಾರ ಟೆಕ್ನಿಕಲ್ ಸೆಲ್ ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಕಳವು ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿದ ಪೊಲೀಸ್ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದಾರೆ.



