ಶಾಗ್ಯ ಅರಣ್ಯ ಕಚೇರಿ ಮೇಲೆ ಸಾರ್ವಜನಿಕರ ದಾಳಿ: ಸೆರೆಹಿಡಿದು ಹತ್ಯೆ ಮಾಡಿದ ಆರೋಪ, ಶೂಟೌಟ್ ಬೆನ್ನಲ್ಲೇ ಉದ್ವಿಗ್ನ!

ಚಾಮರಾಜನಗರ: ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣದ ಬೆನ್ನಲ್ಲೇ, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶದ ಜ್ವಾಲೆ ತೀವ್ರಗೊಂಡಿದ್ದು, ಶಾಗ್ಯದಲ್ಲಿರುವ ಅರಣ್ಯ ಇಲಾಖೆಯ ಕಚೇರಿಯ ಮೇಲೆ ನುಗ್ಗಿ ದಾಳಿ ನಡೆಸಲಾಗಿದೆ.
ಉದ್ವಿಗ್ನಗೊಂಡ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಕಚೇರಿಯಲ್ಲಿದ್ದ ಪೀಠೋಪಕರಣಗಳು, ಬೈಕ್ಗಳು ಸೇರಿದಂತೆ ಇತರೆ ವಸ್ತುಗಳನ್ನು ಧ್ವಂಸಗೊಳಿಸಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸ್ಥಳದಲ್ಲಿ ಬಾರೀ ಗಲಾಟೆ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ಹತೋಟಿ ತಪ್ಪುತ್ತಿದ್ದಂತೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸೆರೆಹಿಡಿದು ಹತ್ತಿರದಿಂದ ಗುಂಡಿಟ್ಟ ಆರೋಪ:
ಆರಂಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ವೇಳೆ ಗುಂಡಿನ ಕಾಳಗ ನಡೆದಿದೆ ಎಂದು ಮಾಹಿತಿ ನೀಡಿದ್ದರು. ಆದರೆ ಇದನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಸ್ಥಳೀಯರು, “ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಮುಚ್ಚಿಹಾಕಲು ಸುಳ್ಳು ಕಥೆ ಕಟ್ಟುತ್ತಿದ್ದಾರೆ. ಮೊದಲು ಮೂವರನ್ನು ವಶಕ್ಕೆ ಪಡೆದು, ಸೆರೆಹಿಡಿದ ನಂತರವೇ ಅತ್ಯಂತ ಹತ್ತಿರದಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
(ಸೂಚನೆ: ಬೇಟೆಗಾರರನ್ನು ಸೆರೆಹಿಡಿದು ನಂತರ ಹತ್ಯೆ ಮಾಡಲಾಗಿದೆ ಎಂಬುದು ಸ್ಥಳೀಯರ ಆರೋಪವಾಗಿದ್ದು, ಈ ಬಗ್ಗೆ ಸ್ವತಂತ್ರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.)
ಸ್ಥಳದಲ್ಲಿ ಬಿಗುವಿನ ವಾತಾವರಣ:
ಘಟನೆಯಿಂದಾಗಿ ಶಾಗ್ಯ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಆಕ್ರೋಶಿತ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪಟ್ಟು ಹಿಡಿದಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.



