ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಬಂಧನ: ಗಡೀಪಾರಿಗೆ ಚಾಲನೆ!

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದಿರುವ ಬೆಂಗಳೂರು ನಗರ ಪೊಲೀಸರು, ಅವರನ್ನು ಗಡೀಪಾರು ಮಾಡುವ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಿದ್ದಾರೆ. ನಗರದ 10 ಪ್ರತ್ಯೇಕ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇವರನ್ನು ಬಂಧಿಸಲಾಗಿತ್ತು.
ಪೊಲೀಸ್ ಕಠಿಣ ಭದ್ರತೆಯಲ್ಲಿ ಪಶ್ಚಿಮ ಬಂಗಾಳಕ್ಕೆ ಪಯಣ
ವಶಕ್ಕೆ ಪಡೆಯಲಾದ 31 ಬಾಂಗ್ಲಾದೇಶಿ ಪ್ರಜೆಗಳನ್ನು 20 ಪೊಲೀಸ್ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾ ರೈಲ್ವೆ ನಿಲ್ದಾಣಕ್ಕೆ ಕರೆದೊಯ್ಯಲಾಗುತ್ತಿದೆ.
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ (IPS) ಅವರು ನೀಡಿರುವ ಮಾಹಿತಿಯಂತೆ, ಈ ತಂಡವು ಮಂಗಳವಾರ ಸಂಜೆ 5:00 ಗಂಟೆಯ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದ್ದು, ಅಲ್ಲಿ ಗಡೀಪಾರಿನ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಗಡಿ ಭದ್ರತಾ ಪಡೆಗೆ (BSF) ಹಸ್ತಾಂತರಿಸಲಾಗುತ್ತದೆ.
’ಆಪರೇಷನ್ ಮುಕ್ತ’ ಕಾರ್ಯಾಚರಣೆ ತೀವ್ರ
ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ‘ಆಪರೇಷನ್ ಮುಕ್ತ’ ಕಾರ್ಯಾಚರಣೆಯನ್ನು ತೀವ್ರವಾಗಿ ಮುಂದುವರಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ (IPS) ತಿಳಿಸಿದ್ದಾರೆ.
ಅಕ್ರಮ ವಲಸಿಗರ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು. ಆದರೆ, ಯಾವುದೇ ಕಾರಣಕ್ಕೂ ಸಾರ್ವಜನಿಕರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಮತ್ತು ಕಾನೂನಿನ ಚೌಕಟ್ಟಿನಲ್ಲೇ ಪೊಲೀಸರಿಗೆ ಸಹಕರಿಸಬೇಕು ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ.



