Crime Newsಕ್ರೈಂ ಸುದ್ದಿಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿಸ್ಥಳೀಯ ಸುದ್ದಿಗಳು

ಅರಸೀಕೆರೆ: ಪೊಲೀಸರ ದಾಳಿ ವೇಳೆ ಓಡುತ್ತಿದ್ದ ಯುವಕ ಸಾವು; ಯುಗಾದಿ ಸಂಭ್ರಮದ ನಡುವೆ ಶೋಕದ ಛಾಯೆ

Share News

ಅರಸೀಕೆರೆ: ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ಯುಗಾದಿ ಹಬ್ಬದ ದಿನದಂದೇ ಭೀಕರ ದುರಂತವೊಂದು ಸಂಭವಿಸಿದೆ. ನಿರ್ಜನ ಪ್ರದೇಶದಲ್ಲಿ ಜೂಜಾಟವಾಡುತ್ತಿದ್ದ ವೇಳೆ ಪೊಲೀಸರ ದಾಳಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಯುವಕನೊಬ್ಬ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ಅರೆಕೆರೆ ಗ್ರಾಮದ ನಿವಾಸಿ ಪ್ರವೀಣ್ (34) ಮೃತಪಟ್ಟ ದುರ್ದೈವಿ.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದ ಸಮೀಪದ ತಾವರೆಹಳ್ಳಿ ಎಂಬ ನಿರ್ಜನ ಪ್ರದೇಶದಲ್ಲಿ ಯುವಕರ ಗುಂಪೊಂದು ಇಸ್ಪೀಟ್ ಜೂಜಾಟದಲ್ಲಿ ತೊಡಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಜಾವಗಲ್ ಪೊಲೀಸರು ಸ್ಥಳದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡ ತಕ್ಷಣ ಜೂಜುಕೋರರು ದಿಕ್ಕಾಪಾಲಾಗಿ ಓಡಲಾರಂಭಿಸಿದ್ದಾರೆ. ಈ ವೇಳೆ ಪ್ರವೀಣ್ ಕೂಡ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಓಡುವಾಗ ಆಯತಪ್ಪಿ ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಪ್ರವೀಣ್ ಅವರ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ:

ಆರೋಗ್ಯ ಸಮಸ್ಯೆ: ಮೃತ ಪ್ರವೀಣ್ ಮೊದಲೇ ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಓಡುವ ಧಾವಂತದಲ್ಲಿ ರೋಗ ಉಲ್ಬಣಿಸಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ರಕ್ತದ ಕಲೆಗಳು: ಆದರೆ, ಮೃತದೇಹದ ಮೇಲೆ ರಕ್ತದ ಕಲೆಗಳು ಕಂಡುಬಂದಿರುವುದು ಸಾವಿನ ಬಗ್ಗೆ ಸಂಶಯ ಮೂಡಿಸಿದೆ. ಇದು ಆಕಸ್ಮಿಕವಾಗಿ ಬಿದ್ದಿದ್ದರಿಂದಾದ ಗಾಯವೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಚರ್ಚೆ ಶುರುವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿಗಳು ಮಾತನಾಡಿ, “ದಾಳಿ ವೇಳೆ ಈ ಘಟನೆ ನಡೆದಿದೆ. ಮೃತದೇಹದ ಮೇಲೆ ರಕ್ತದ ಕಲೆಗಳಿರುವುದರಿಂದ ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ,” ಎಂದು ತಿಳಿಸಿದ್ದಾರೆ.

ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ (HIMS) ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ವರದಿ ಬಂದ ನಂತರವಷ್ಟೇ ಈ ಸಾವಿನ ಹಿಂದಿನ ನೈಜ ಕಾರಣ ಏನೆಂಬುದು ಸ್ಪಷ್ಟವಾಗಲಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!