21 ವರ್ಷಗಳ ಬಳಿಕ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ: ಗಂಗಾವತಿ ನ್ಯಾಯಾಲಯದ ಮಹತ್ವದ ತೀರ್ಪು

ಕೊಪ್ಪಳ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿ ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ಕನಕಗಿರಿಯ ಬೈಲಕಂಪುರ ನಿವಾಸಿ ಪರಸುರಾಮ್ ಎಂಬಾತನೇ ಶಿಕ್ಷೆಗೆ ಗುರಿಯಾದ ಆರೋಪಿ. 2004ರ ಜನವರಿ 15ರಂದು ಈ ಭೀಕರ ಘಟನೆ ನಡೆದಿತ್ತು. ಮೃತ ದುರಗಪ್ಪ ನಾಯಕ ಎಂಬುವವರು ಪರಸುರಾಮನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ರೆಡ್-ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಇದರಿಂದ ಆಕ್ರೋಶಗೊಂಡ ಪರಸುರಾಮ್, ದುರಗಪ್ಪ ನಾಯಕ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು.
ಕೊಲೆ ನಡೆದ ಬಳಿಕ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಬಂಧನದ ಭೀತಿಯಿಂದ ಪರಸುರಾಮ್ ಬೆಂಗಳೂರಿಗೆ ಪರಾರಿಯಾಗಿ ದಶಕಗಳ ಕಾಲ ಅಲ್ಲಿಯೇ ತಲೆಮರೆಸಿಕೊಂಡಿದ್ದನು. ಪೊಲೀಸರ ಕಣ್ಣು ತಪ್ಪಿಸಿ 21 ವರ್ಷಗಳ ಕಾಲ ಅಲೆದಾಡುತ್ತಿದ್ದ ಈತನನ್ನು, ನಿರಂತರ ಕಾರ್ಯಾಚರಣೆಯ ಮೂಲಕ 2025ರಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದರು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಆರೋಪಿ ಪರಸುರಾಮ್ ದೋಷಿ ಎಂದು ತೀರ್ಮಾನಿಸಿದರು. ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಈ ತೀರ್ಪು ಸಾಬೀತುಪಡಿಸಿದ್ದು, ಹಳೆಯ ಪ್ರಕರಣವೊಂದಕ್ಕೆ ಈಗ ನ್ಯಾಯ ಸಿಕ್ಕಂತಾಗಿದೆ.
ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.



