ಪಾವಗಡ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆತ್ಮಹತ್ಯೆ; ಕಚೇರಿಯಲ್ಲೇ ನೇಣಿಗೆ ಶರಣು!

ಪಾವಗಡ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೃತರನ್ನು ಮಲ್ಲಿಕಾರ್ಜುನಯ್ಯ (60) ಎಂದು ಗುರುತಿಸಲಾಗಿದೆ. ಇವರು ಪಾವಗಡ ಪಟ್ಟಣದಲ್ಲಿರುವ ತಮ್ಮ ಕಚೇರಿಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಜೀವನ ಅಂತ್ಯಗೊಳಿಸಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು.
ಮಲ್ಲಿಕಾರ್ಜುನಯ್ಯ ಅವರು ಸಾವಿಗೂ ಮುನ್ನ ವಿಡಿಯೋವೊಂದನ್ನು ಚಿತ್ರೀಕರಿಸಿ ತಮ್ಮ ಕಚೇರಿಯ ಸಿಬ್ಬಂದಿಗೆ ಕಳುಹಿಸಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ವಿಡಿಯೋದಲ್ಲಿ ತಮ್ಮ ಸಾವಿಗೆ ಕಾರಣವೇನು ಅಥವಾ ಕೆಲಸದ ಒತ್ತಡದ ಬಗ್ಗೆ ಏನಾದರೂ ಉಲ್ಲೇಖಿಸಿದ್ದಾರೆಯೇ ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.
ಘಟನಾ ಸ್ಥಳಕ್ಕೆ ಪಾವಗಡ ಪಟ್ಟಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಧಿಕಾರಿಗಳ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.
”ವಯೋನಿವೃತ್ತಿಗೆ ಸಮೀಪವಿದ್ದ ಅಧಿಕಾರಿಯೊಬ್ಬರು ಇಂತಹ ನಿರ್ಧಾರ ಕೈಗೊಂಡಿರುವುದು ಇಲಾಖೆಯೊಳಗೆ ತಲ್ಲಣ ಮೂಡಿಸಿದೆ. ವೈಯಕ್ತಿಕ ಕಾರಣವೋ ಅಥವಾ ಕಚೇರಿಯ ಕಿರುಕುಳವೋ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ,” ಎಂದು ಪೊಲೀಸ್ ಮೂಲಗಳು ತಿಳಿಸಿವೆ.



