Crime Newsಕ್ರೈಂ ಸುದ್ದಿರಾಜ್ಯ ಸುದ್ದಿ

ಕಾರ್ಕಳ: ಜಾನುವಾರು ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ವಿರುದ್ಧ ‘ಕೋಕಾ’ ಕಾಯ್ದೆ ಅಡಿ ಕ್ರಮ

Share News

ಕಾರ್ಕಳ: ಜಾನುವಾರು ಕಳ್ಳತನ ಮತ್ತು ಸಂಘಟಿತ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಹೆಜ್ಜೆ ಇಟ್ಟಿದ್ದಾರೆ. ಈ ಹಿಂದೆ ಜಾನುವಾರು ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಗಳ ವಿರುದ್ಧ ಈಗ ಕೋಕಾ (KCOCA – ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಳವಡಿಸಿ ಮತ್ತೆ ಬಂಧಿಸಲಾಗಿದೆ.

ಬಂಧಿತರನ್ನು ಕಾರ್ಕಳ ನಲ್ಲೂರು ಗ್ರಾಮದ ಯೂನಿಸ್ (31), ಮೂಡಬಿದಿರೆ ಪುತ್ತಿಗೆ ಗ್ರಾಮದ ಇಕ್ಬಾಲ್ (29), ಕಲ್ಲಬೆಟ್ಟು ಗ್ರಾಮದ ನಾಸೀರ್ (28) ಮತ್ತು ಶೌಕತ್ ಅಲಿ (34) ಎಂದು ಗುರುತಿಸಲಾಗಿದೆ. ಈ ನಾಲ್ವರು ವ್ಯವಸ್ಥಿತವಾಗಿ ತಂಡ ಕಟ್ಟಿಕೊಂಡು ಜಾನುವಾರು ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

2025ರ ಸೆಪ್ಟೆಂಬರ್ 29ರಂದು ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ಜಯಶ್ರೀ ಪೂಜಾರಿ ಎಂಬುವವರ ಮನೆಯ ಹಟ್ಟಿಗೆ ಈ ತಂಡ ನುಗ್ಗಿತ್ತು. ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದಾಗ ಮನೆಯವರು ಎಚ್ಚರಗೊಂಡಿದ್ದರು. ಈ ವೇಳೆ ಆರೋಪಿಗಳು ಜಯಶ್ರೀ ಅವರಿಗೆ ತಲವಾರು ತೋರಿಸಿ ಜೀವ ಬೆದರಿಕೆ ಹಾಕಿದ್ದರು. ಹಟ್ಟಿಯಲ್ಲಿದ್ದ ಸುಮಾರು ₹35,000 ಮೌಲ್ಯದ ಮೂರು ಜಾನುವಾರುಗಳನ್ನು ಬಲವಂತವಾಗಿ ವಾಹನಕ್ಕೆ ತುಂಬಿಸಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಾಥಮಿಕ ತನಿಖೆಯ ನಂತರ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು. ಆದರೆ, ಹೆಚ್ಚಿನ ತನಿಖೆಯಲ್ಲಿ ಈ ತಂಡವು ಸಂಘಟಿತವಾಗಿ ಅಪರಾಧಗಳನ್ನು ಎಸಗುತ್ತಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಪೊಲೀಸರು ಇವರ ವಿರುದ್ಧ ಕೋಕಾ ಕಾಯ್ದೆಯನ್ನು ಅಳವಡಿಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳ ಜಾಮೀನನ್ನು ರದ್ದುಪಡಿಸಿ ಮತ್ತೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

​ಜಾನುವಾರು ಕಳ್ಳತನ ಮತ್ತು ಅಕ್ರಮ ಸಾಗಾಟ ತಡೆಯಲು ಪೊಲೀಸ್ ಇಲಾಖೆ ಇಂತಹ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿರುವುದು ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!