ಓವಲ್ ಗ್ರೌಂಡ್ನಲ್ಲಿ ಪ್ರಧಾನಿ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್: ಬೀದಿ ನಾಯಿಗಳ ಹಾವಳಿಗೆ ಬ್ರೇಕ್, ಪಾಲಿಕೆಯಿಂದ ಭಾರಿ ಸೆರೆ ಕಾರ್ಯಾಚರಣೆ!

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೈಸೂರು ಭೇಟಿಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿಯಾದ್ಯಂತ ಬಿಗಿ ಭದ್ರತೆ ಹಾಗೂ ಕಟ್ಟೆಚ್ಚರ ವಹಿಸಲಾಗಿದೆ. ಪ್ರಧಾನಿಯವರು ಬಂದಿಳಿಯಲಿರುವ ನಗರದ ಐತಿಹಾಸಿಕ ಓವಲ್ ಮೈದಾನದ ಆವರಣದಲ್ಲಿ ಯಾವುದೇ ರೀತಿಯ ಭದ್ರತಾ ಲೋಪ ಉಂಟಾಗದಂತೆ ತಡೆಯಲು ಮೈಸೂರು ಮಹಾನಗರ ಪಾಲಿಕೆ ವಿಶಿಷ್ಟ ಕಾರ್ಯಾಚರಣೆಗೆ ಇಳಿದಿದೆ.
ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಓವಲ್ ಮೈದಾನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿಗೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ.
ಪಾಲಿಕೆಯಿಂದ ಜಾಲ ಬೀಸಿದ ಸಿಬ್ಬಂದಿ:
ಮೈಸೂರು ಮಹಾನಗರ ಪಾಲಿಕೆಯ ನೈರ್ಮಲ್ಯ ಮತ್ತು ಆರೋಗ್ಯ ವಿಭಾಗದ ಸಿಬ್ಬಂದಿ ಶನಿವಾರ ಮುಂಜಾನೆಯಿಂದಲೇ ಕಾರ್ಯಾಚರಣೆಗೆ ಧುಮುಕಿದ್ದು, ಓವಲ್ ಮೈದಾನ ಹಾಗೂ ಸುತ್ತಮುತ್ತಲ ರಸ್ತೆಗಳಲ್ಲಿ ಅಲೆದಾಡುತ್ತಿದ್ದ ಬೀದಿ ನಾಯಿಗಳನ್ನು ಬಲೆ ಬೀಸಿ ಸೆರೆ ಹಿಡಿಯುತ್ತಿದ್ದಾರೆ.
ಪ್ರಧಾನಿ ಮೋದಿ ಅವರ ಆಗಮನ ಮತ್ತು ನಿರ್ಗಮನದ ವೇಳೆ ಹಾಗೂ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭದಲ್ಲಿ ಯಾವುದೇ ರೀತಿಯ ಅಡಚಣೆ ಅಥವಾ ಸುರಕ್ಷತಾ ಸಮಸ್ಯೆಗಳು ಎದುರಾಗಬಾರದು ಎನ್ನುವ ಮುಂಜಾಗ್ರತಾ ಕ್ರಮವಾಗಿ ಈ ಕಾರ್ಯಚರಣೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಾದ್ಯಂತ ಬಿಗಿ ಭದ್ರತೆ:
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆ ವತಿಯಿಂದ ಓವಲ್ ಮೈದಾನ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೈದಾನದ ಸುತ್ತಮುತ್ತ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಕಟ್ಟನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.



