ಕೋಡಿಪಾಳ್ಯ ಸಮೀಪ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ 13 ವರ್ಷದ ಸೈಕಲ್ ಸವಾರ ಬಾಲಕ ದುರ್ಮರಣ – ಸ್ಥಳೀಯರ ರಸ್ತೆ ತಡೆ ಪ್ರತಿಭಟನೆ!

ದೊಡ್ಡಬಳ್ಳಾಪುರ: ಸೈಕಲ್ನಲ್ಲಿ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ ಲಾರಿ ಡಿಕ್ಕ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಕೋಡಿಪಾಳ್ಯ ಸಮೀಪ ನಡೆದಿದೆ.
ಮೃತ ಬಾಲಕನನ್ನು ಧನು (13) ಎಂದು ಗುರುತಿಸಲಾಗಿದೆ. ಧನು ತನ್ನ ಸೈಕಲ್ನಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತ ಬಾಲಕನ ತಾಯಿ ಮಧುರೆ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಸ್ಥಳೀಯರ ಆಕ್ರೋಶ, ರಸ್ತೆ ತಡೆ ಪ್ರತಿಭಟನೆ:
ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಅಪಘಾತ ಎಸಗಿ ಸ್ಥಳದಿಂದ ಪರಾರಿಯಾಗಿರುವ ಲಾರಿ ಚಾಲಕನನ್ನು ಕೂಡಲೇ ಬಂಧಿಸಬೇಕು ಹಾಗೂ ಕಡುಬಡತನದಲ್ಲಿರುವ ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಶಾಸಕರು ಆಗಮಿಸುವವರೆಗೂ ಮೃತದೇಹ ತೆರವುಗೊಳಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ಪಿ (DySP) ಹಾಗೂ ಪೋಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.



