ಖಾನಾಪುರದಲ್ಲಿ ರಸ್ತೆ ಮೇಲೆಯೇ ಚರಂಡಿ ನೀರು: ರಸ್ತೆ ತಡೆ ಎಚ್ಚರಿಕೆ ನೀಡಿದ ಗ್ರಾಮಸ್ಥರು ಹಾಗೂ ಶರಣು ಕಟ್ಟಿಮನಿ

ಶಹಾಪುರ (ಆಗಸ್ಟ್ 02): ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಎದುರೇ ಚರಂಡಿ ನೀರು ರಸ್ತೆ ಮೇಲೆ ಹರಿದು ಜಮೆಯಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾದಗಿರಿ-ಶಹಾಪುರ ಮುಖ್ಯ ಹೆದ್ದಾರಿಯಲ್ಲೇ ದುರ್ವಾಸನೆಯಿಂದ ಕೂಡಿದ ಚರಂಡಿ ನೀರು ನಿಂತಿರುವುದರಿಂದ ಗ್ರಾಮಸ್ಥರು ಹಾಗೂ ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ. ದುರ್ವಾಸನೆ ಹಾಗೂ ಅಸ್ವಚ್ಛತೆಯಿಂದ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದೆ.
ತೆರಿಗೆ ವಸೂಲಿ ಮಾಡಲು ತೋರಿಸುವ ಆಸಕ್ತಿಯನ್ನು ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ತೋರಿಸುತ್ತಿಲ್ಲ. ಗ್ರಾಮ ಪಂಚಾಯಿತಿ ಪಿಡಿಒ (PDO) ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
“ಇದೇ ರೀತಿಯ ದುರ್ವಾಸನೆ ಹೊಡೆಯುವ ನೀರು ನಿಮ್ಮ ಪಂಚಾಯಿತಿ ಕಚೇರಿಯ ಮುಂದೆ ನಿಂತರೆ ನೀವು ಸುಮ್ಮನಿರುತ್ತೀರಾ? ಇನ್ನು ಕೆಲವೇ ದಿನಗಳಲ್ಲಿ ಈ ಸಮಸ್ಯೆಯನ್ನು ಸರಿಪಡಿಸದಿದ್ದರೆ ‘ಶಹಾಪುರ-ಯಾದಗಿರಿ’ ರಾಜ್ಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಸಮಾಜ ಸೇವಕ ಶರಣು ಕಟ್ಟಿಮನಿ ಹಾಗೂ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಆಂಜನೇಯ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೀವ್ರ ಅನಾನುಕೂಲವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಚರಂಡಿ ನೀರು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.



