ಕೋಡಿಪಾಳ್ಯ ಸಮೀಪ ಭೀಕರ ರಸ್ತೆ ಅಪಘಾತ: ಲಾರಿ ಡಿಕ್ಕಿಯಾಗಿ 13 ವರ್ಷದ ಬಾಲಕ ಸ್ಥಳದಲ್ಲೇ ದುರ್ಮರಣ!

ಸೈಕಲ್ನಲ್ಲಿ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಕೋಡಿಪಾಳ್ಯ ಸಮೀಪ ನಡೆದಿದೆ.
ಘಟನೆಯ ವಿವರ:
ಮೃತ ಬಾಲಕನನ್ನು ಧನು (13) ಎಂದು ಗುರುತಿಸಲಾಗಿದೆ. ಧನು ಸೈಕಲ್ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಾಲಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತ ಬಾಲಕನ ತಾಯಿ ಮಧುರೆ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ:
ಅಪಘಾತ ಎಸಗಿದ ಲಾರಿ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಇದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಚಾಲಕನನ್ನು ತಕ್ಷಣವೇ ಬಂಧಿಸಬೇಕು ಹಾಗೂ ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಸ್ಥಳೀಯರು ರಸ್ತೆ ತಡೆದು ಭಾರಿ ಪ್ರತಿಭಟನೆ ನಡೆಸಿದರು. ಸ್ಥಳೀಯ ಶಾಸಕರು ಆಗಮಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಪೊಲೀಸ್ ಭೇಟಿ ಹಾಗೂ ತನಿಖೆ:
ಘಟನೆಯ ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.



