ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ – ಜಿಲ್ಲಾಧಿಕಾರಿಗಳ ಪರಿಶೀಲನೆ

ಶಿರಾ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಹಾಗೂ ಸಹಕಾರ ಬೇಸಾಯ ಯೋಜನೆಗೆ ಸಂಬಂಧಿಸಿದ ಭೂಮಿ ಕುರಿತು ಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಂಧಿನಗರ (ತರೂರು ಜಿ.ಪಂ): ತರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರ ಗ್ರಾಮದಲ್ಲಿ ಪ್ರಸ್ತುತ ಖಾಸಗಿ ಕೊಳವೆಬಾವಿ ಮೂಲಕ ಸಾರ್ವಜನಿಕರಿಗೆ ನೀರು ಪೂರೈಸಲಾಗುತ್ತಿದ್ದು, ನೀರು ಸರಬರಾಜು ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಹನುಮನಹಳ್ಳಿ (ಮೇಲುಕುಂಟೆ ಜಿ.ಪಂ): ಕಸಬಾ ಹೋಬಳಿಯ ಹನುಮನಹಳ್ಳಿಯಲ್ಲಿ ಹಾಲಿ ಇದ್ದ ಕೊಳವೆಬಾವಿಯನ್ನು ರೀ-ಡ್ರಿಲ್ ಮಾಡಿ ನೀರು ಪೂರೈಸಲಾಗುತ್ತಿದೆ. ಆದರೆ, ಈ ಕೊಳವೆಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಹೊಸ ಕೊಳವೆಬಾವಿ ಕೊರೆಯುವಂತೆ ಸ್ಥಳೀಯ ಸಾರ್ವಜನಿಕರು ಮನವಿ ಮಾಡಿದರು.
ಅಧಿಕಾರಿಗಳಿಗೆ ಸೂಚನೆ: ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ (RDPR) ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲ್ಲೂಕು ಪಂಚಾಯಿತಿ ಇಒ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿಯಮಾನುಸಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ದೇವಸ್ಥಾನ ಸಮಿತಿ ಹಾಗೂ ಖಾಸಗಿ ಒಪ್ಪಂದ: ಅಮ್ಮಜಮ್ಮ ದೇವಸ್ಥಾನದ ಸಮಿತಿ ಹಾಗೂ ಖಾಸಗಿ ಕೊಳವೆಬಾವಿ ಮಾಲೀಕರೊಂದಿಗೆ ಒಪ್ಪಂದ (Agreement) ಮಾಡಿಕೊಂಡು ಗ್ರಾಮಕ್ಕೆ ನೀರು ಸರಬರಾಜು ಮಾಡುತ್ತಿರುವ ಕುರಿತು ದೇವಸ್ಥಾನ ಸಮಿತಿಯ ಸದಸ್ಯರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ, ಶಿರಾ ತಾಲ್ಲೂಕಿನ ಕರೆಜವನಹಳ್ಳಿ ಹಾಗೂ ತೋರಪ್ಪನಹಳ್ಳಿ ಗ್ರಾಮಗಳಲ್ಲಿ ಸಹಕಾರ ಬೇಸಾಯ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಸಾಗುವಳಿ ಹಕ್ಕು ನೀಡುವ ಕುರಿತು ಸ್ಥಳ ಪರಿಶೀಲನೆ ನಡೆಸಲಾಯಿತು. ಈ ಕುರಿತು ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಈ ಸ್ಥಳ ಪರಿಶೀಲನಾ ಪ್ರವಾಸದ ವೇಳೆ ಶಿರಾ ತಾಲ್ಲೂಕು ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು (EO), ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (AEE), ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.



