ತೀರ್ಥಹಳ್ಳಿ: ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಇಂದು ಜಗದೀಶ್ ಬಿ. ಅವರ ಏಕವ್ಯಕ್ತಿ ಶಿಲ್ಪಕಲಾ ಪ್ರದರ್ಶನ!

ತೀರ್ಥಹಳ್ಳಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಪ್ರಸಿದ್ಧ ಕಲಾವಿದ ಜಗದೀಶ್ ಬಿ. ಅವರ ವಿಶೇಷ ‘ಏಕವ್ಯಕ್ತಿ ಶಿಲ್ಪಕಲಾ ಪ್ರದರ್ಶನ’ವು ಇಂದು (ಭಾನುವಾರ) ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜನೆಗೊಂಡಿದೆ.
ಬೆಳಿಗ್ಗೆ 10.30 ರಿಂದ ಸಂಜೆ 8.00 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಪ್ರದರ್ಶನ ಮುಕ್ತವಾಗಿರಲಿದೆ.
ಆರಗ ಜ್ಞಾನೇಂದ್ರರಿಂದ ಉದ್ಘಾಟನೆ:
ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಲಾ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ‘ನಟಮಿತ್ರರು’ ತಂಡದ ಅಧ್ಯಕ್ಷ ಸಂದೇಶ್ ಜವಳಿ, ಯಕ್ಷಗಾನ ಕಲಾವಿದ ಹಾಗೂ ಪತ್ರಕರ್ತ ಬಿ. ಗಣಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹಾಗೂ ತಹಶೀಲ್ದಾರ್ ಎಸ್. ರಂಜಿತ್ ಭಾಗವಹಿಸಲಿದ್ದಾರೆ.
ಸಾರ್ವಜನಿಕರಿಗೆ ಉಚಿತ ಪ್ರವೇಶ:
ಕಲಾ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಶಿಲ್ಪಕಲಾಕೃತಿಗಳನ್ನು ಮುಕ್ತವಾಗಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕಲಾಭಿಮಾನಿಗಳು ಹಾಗೂ ತೀರ್ಥಹಳ್ಳಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರದರ್ಶನವನ್ನು ವೀಕ್ಷಿಸಿ ಯಶಸ್ವಿಗೊಳಿಸಬೇಕಾಗಿ ಶಿಲ್ಪಕಲಾವಿದ ಜಗದೀಶ್ ಬಿ. ಕೋರಿಕೊಂಡಿದ್ದಾರೆ.



