ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ – ನದಿ ಪಾತ್ರದ ಜನರಿಗೆ ಹೈ ಅಲರ್ಟ್!

ಕುಶಾಲನಗರ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಮಳೆ ಬಿರುಸುಗೊಂಡಿದ್ದು, ಜಲಾಶಯಕ್ಕೆ ಹರಿದುಬರುತ್ತಿರುವ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಜಲಾಶಯ ಶೀಘ್ರದಲ್ಲೇ ಭರ್ತಿಯಾಗುವ ಹಂತ ತಲುಪಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಇಂದಿನಿಂದ ನೀರು ಬಿಡುಗಡೆ: ಜುಲೈ 25 ರ (ಇಂದು) ಮಧ್ಯಾಹ್ನ 2 ಗಂಟೆಯ ನಂತರ ಹಾರಂಗಿ ಜಲಾಶಯದಿಂದ ನದಿಗೆ ಸುಮಾರು 3,000 ದಿಂದ 5,000 ಕ್ಯೂಸೆಕ್ ಹೆಚ್ಚುವರಿ ನೀರನ್ನು ಹರಿಸುವ ಸಾಧ್ಯತೆಯಿದೆ.
ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳಹರಿವು ಮತ್ತಷ್ಟು ಹೆಚ್ಚಾಗಲಿದೆ.
ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ: ಹಾರಂಗಿ ಮತ್ತು ಕಾವೇರಿ ನದಿ ಪಾತ್ರದ ಇಕ್ಕೆಲಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರು, ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಯ ಬಗ್ಗೆ ತೀವ್ರ ಮುನ್ನೆಚ್ಚರಿಕೆ ವಹಿಸಿ, ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು.
“ನದಿಯ ನೀರಿನ ಮಟ್ಟ ದಿಢೀರ್ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿಗಿಳಿಯುವುದು, ಜಾನುವಾರುಗಳನ್ನು ತೊಳೆಯುವುದು ಅಥವಾ ಕಾವೇರಿ-ಹಾರಂಗಿ ನದಿ ತೀರಕ್ಕೆ ತೆರಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.”
— ಎಂ.ಎಸ್. ಮಹೇಶ್, ಕಾರ್ಯಪಾಲಕ ಎಂಜಿನಿಯರ್, ಹಾರಂಗಿ ಪುನರ್ವಸತಿ ವಿಭಾಗ, ಕುಶಾಲನಗರ.



